ಸಾರ್ವಜನಿಕರು ಆಶಾಕಿರಣ ಯೋಜನೆಯ ಸದುಪಯೋಗ ಪಡಿಸಿಕೊಳ್ಳಿ:ಜಿಲ್ಲಾ ಅಂದತ್ವ ನಿವಾರಣಾಧಿಕಾರಿ ಡಾ.ನಾಗರಾಜ್

ಚಳ್ಳಕೆರೆ : ರಾಜ್ಯದ ಜನರ ಪ್ರತಿ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆಗಳನ್ನು ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ಆಶಾಕಿರಣ ಯೋಜನೆಯನ್ನು ಪ್ರತಿಯೊಬ್ಬ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದು ಜಿಲ್ಲಾ ಅಂದತ್ವ ನಿವಾರಣಾಧಿಕಾರಿ ಡಾ. ನಾಗರಾಜ್ ಹೇಳಿದರು.

ತಾಲ್ಲೂಕಿನ ಸಾಣೀಕೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಉಚಿತ ಕನ್ನಡಕ ವಿತರಣೆ ಮಾಡುವ ಕಾರ್ಯಕ್ರಮ ಉದ್ಘಾಟಿಸಿ ಫಲಾನುಭವಿಗಳಿಗೆ ಕನ್ನಡಕ ವಿತರಿಸಿ ಮಾತನಾಡಿದ ಅವರು ಜನಸಾಮಾನ್ಯರಲ್ಲಿ ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿ ಅಂಧತ್ವ ಮುಕ್ತ ಸಮಾಜ ನಿರ್ಮಾಣದತ್ತ ಆರೋಗ್ಯ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. 45 ವರ್ಷ ವಯಸ್ಸಿನ ಮೇಲ್ಪಟ ಪ್ರತಿಯೊಬ್ಬರು ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಿ,
ಆಶಾಕಿರಣ ಯೋಜನೆಯಡಿ ಮನೆ ಬಾಗಿಲಿಗೆ ಕಣ್ಣಿನ ಆರೋಗ್ಯ ಸೇವೆ ಸಿಗಲಿದೆ. ಆಶಾ ಮತ್ತು ಆರೋಗ್ಯ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದು ನೇತ್ರ ತಪಾಸಣೆ ನಡೆಸಲಿದ್ದಾರೆ. ಅಗತ್ಯವಿರುವವರಿಗೆ ಹೆಚ್ಚಿನ ಚಿಕಿತ್ಸಾ ಸೇವೆ ಮತ್ತು ಉಚಿತ ಕನ್ನಡಕ ವಿತರಣೆ ಸೇವೆ ಸರ್ಕಾರದಿಂದ ಮಾಡಲಾಗುತ್ತದೆ ಎಂದರು.

ಸಾಣೀಕೆರೆ ಆಡಳಿತ ವೈದ್ಯಾಧಿಕಾರಿ ಡಾ ನಾಗರಾಜ್ ಮಾತನಾಡಿ ಕಣ್ಣು ಮಾನವನ ಅತ್ಯಂತ ಮಹತ್ವದ ಅಂಗವಾಗಿದೆ. ಕಣ್ಣಿದ್ದರೆ ಮಾತ್ರ ಜಗತ್ತಿನ ಸೌಂದರ್ಯ ಕಾಣಬಹುದಾಗಿದೆ. ಹೀಗಾಗಿ ಪ್ರತಿಯೊಬ್ಬರು ನೇತ್ರ ತಪಾಸಣೆ ಮಾಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ವಿಶೇಷವಾಗಿ ಅತಿಸೂಕ್ಷ್ಮ ಬಿದ್ರಿ ಕುಸುರಿ ಕಲೆಯಲ್ಲಿ ತೊಡಗಿಸಿಕೊಂಡಿರುವ ಕಲಾವಿದರು ಕಣ್ಣಿನ ಏನೇ ಸಮಸ್ಯೆ ಕಂಡು ಬಂದರೂ ತಕ್ಷಣ ನೇತ್ರ ತಜ್ಞರನ್ನು ಭೇಟಿ ಮಾಡಿ ಸಲಹೆ ಪಡೆಯಿರಿ ಎಂದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ತಿಪ್ಪೇರುದ್ರಪ್ಪ,ರುದ್ರಮ್ಮ ಆಸ್ಪತ್ರೆ ಸಿಬ್ಬಂದಿ ವರ್ಗದವರು,
ಆಶಾ ಕಾರ್ಯಕರ್ತೆಯರು ಮತ್ತು ಫಲಾನುಭವಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!