ಚಳ್ಳಕೆರೆ :
ಪಂಚ ಗ್ಯಾರಂಟಿ ಯೋಜನೆಗಳ ಪೈಕಿ “ಶಕ್ತಿ” ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಕಳೆದ 2023 ರ ಜೂನ್ 11 ರಿಂದ ಜಾರಿಗೊಳಿಸಿದ್ದು, ರಾಜ್ಯದ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ ಇಂದಿಗೆ ಎರಡು ವರ್ಷ ಪೂರೈಸಿದೆ ಎಂದು ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ನಗರದ ಕೆಎಸ್ ಆರ್ ಟಿ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ ಫಲಾನುಭವಿಗಳ ಸಂಖ್ಯೆ 500 ಕೊಟಿ ಗಡಿ ದಾಟಿದ್ದು, ಈ ಸಂಭ್ರಮವನ್ನು ಸಾಂಕೇತಿಕವಾಗಿ ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲ್ಲೂಕುಗಳಲ್ಲಿನ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ, ಬಸ್ಸಿಗೆ ಪೂಜೆ ಸಲ್ಲಿಸಿ, ಸಾರಿಗೆ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ಸಿಹಿ ತಿನಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಮಾತನಾಡಿ,
ರಾಜ್ಯದಲ್ಲಿ
ನಾರಿಶಕ್ತಿಯ ಸಬಲೀಕರಣಕ್ಕೆ ಸಹಕಾರಿಯಾಗಿರುವ ಶಕ್ತಿ ಯೋಜನೆ ಮುಂದುವರೆಯಬೇಕು ಎನ್ನುತ್ತಾರೆ ಸರಕಾರದ ಶಕ್ತಿ ಯೋಜನೆಯಿಂದ ಬಹಳ ಅನುಕೂಲವಾಗಿದೆ. 500 ಕೋಟಿಗೆ ಹೆಚ್ಚು ಮಹಿಳಾ ಫಲಾನುಭವಿಗಳು ಸರ್ಕಾರಿ ಸ್ವಾಮ್ಯದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ ಮೈಲಿಗಲ್ಲು ಸಾಧಿಸಿರುವುದು ಸಂತಸದ ಸಂಗತಿ ಯಾಗಿದೆ ಎಂದರು.
ಶಕ್ತಿ ಯೋಜನೆಯ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಚಳ್ಳಕೆರೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಹೂವು, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶಕ್ತಿ ಯೋಜನೆಗೆ ಸಂಬಂಧಿಸಿದ ಸಾಧನೆ ಬಿಂಬಿಸುವ ಫ್ಲೆಕ್ಸ್ ಗಳನ್ನು ಬಸ್ ನಿಲ್ದಾಣ ಆವರಣದಲ್ಲಿ ಅಳವಡಿಸಲಾಗಿತ್ತು. ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಶಕ್ತಿ ಯೋಜನೆಯ ಸಾಧನೆಯನ್ನು ಸಿಹಿ ಸವಿಯುವ ಮೂಲಕ ಸಂಭ್ರಮಿಸಿ, ಇಂತಹ ಉತ್ತಮ ಯೋಜನೆ ಜಾರಿಗೊಳಿಸಿದ ಸರ್ಕಾರಕ್ಕೆ ಜೈಕಾರ ಹಾಕಿದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷರಾದ ಶಿಲ್ಪ ಮುರುಳೀಧರ್, ಉಪಾಧ್ಯಕ್ಷರಾದ ಕವಿತಾ ಬೋರಯ್ಯ, ಜಿಲ್ಲಾ ಪಂಚಾಯತ್ ನಾಮ ನಿರ್ದೇಶನ ಸದಸ್ಯರಾದ ರಂಗಸ್ವಾಮಿ, ನಗರಸಭೆ ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ಬಾಯಿ, ಮಹಿಳಾ ಮುಖಂಡರು, ಗ್ಯಾರೆಂಟಿ ಸಮಿತಿಯ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

