ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಪೋಷಕರು ತಮ್ಮ ಮಕ್ಕಳಿಗೆ ಕೇವಲ ವಿದ್ಯೆಯನ್ನು ನೀಡಿದರೆ ಸಾಲದು ಅದರ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿದಾಗ ಮಾತ್ರ ದೇಶಕ್ಕೆ ಸುಸಂಸ್ಕೃತ ಪ್ರಜೆಯನ್ನು ನೀಡಲು ಸಾಧ್ಯ: ಕೇದಾರ ಲಿಂಗ ಶಿವ ಶಾಂತವೀರ ಶಿವಾಚಾರ್ಯ ಸ್ವಾಮೀಜಿ ಅಭಿಮತ
ಚಳ್ಳಕೆರೆ: ಪೋಷಕರು ತಮ್ಮ ಮಕ್ಕಳಿಗೆ ಕೇವಲ ವಿದ್ಯೆಯನ್ನು ನೀಡಿದರೆ ಸಾಲದು ಅದರ ಜೊತೆಗೆ ಸಂಸ್ಕಾರವನ್ನು ಕಲಿಸಿದಾಗ ಮಾತ್ರ ದೇಶಕ್ಕೆ ಸುಸಂಸ್ಕೃತ ಪ್ರಜೆಯನ್ನು ನೀಡಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಎಲ್ಲಾ ಪೋಷಕರು ಜವಾಬ್ದಾರಿ ಹೊರಬೇಕು ಎಂದು ಚನ್ನಗಿರಿ ತಾಲೂಕಿನ ಕೇದಾರ ಶಾಖಾ ಹಿರೇಮಠದ ಕೇದಾರಲಿಂಗ ಶಿವ ಶಾಂತವೀರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ತಾಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ವೀರಶೈವ ಸಮಾಜ ಸೇವಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಎಷ್ಟೇ ಉನ್ನತ ಶಿಕ್ಷಣ ಇದ್ದರು ಸಹ ಸಂಸ್ಕಾರವಿಲ್ಲದಿದ್ದರೆ ಯಾವುದಕ್ಕೂ ಪ್ರಯೋಜನ ಬರುವುದಿಲ್ಲ ಸಮಾಜದಲ್ಲಿ ಅಶಾಂತಿ ಅಧರ್ಮ ಸಂಸ್ಕೃತಿ ಹೆಚ್ಚಾಗುತ್ತಿದ್ದು ಇದಕ್ಕೆ ಮುಖ್ಯ ಕಾರಣ ಸಂಸ್ಕಾರ ಗುಣ ಬೆಳೆಸಿಕೊಳ್ಳದಿರುವುದು ವೀರಶೈವ ಲಿಂಗಾಯತರು ಶಿವ ಧ್ಯಾನ ಲಿಂಗ ಪೂಜೆ ಹಾಗೂ ಬಸವಣ್ಣನ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸನ್ಮಾರ್ಗದಲ್ಲಿ ನಡೆದು ವೀರಶೈವ ಲಿಂಗಾಯತ ಸಮಾಜವನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ಬಲಪಡಿಸಲು ಕಾರ್ಯೊನ್ಮುಖರಾಗಬೇಕು ಎಂದು ಕರೆ ನೀಡಿದರು.
ಶಾಸಕ ಟಿ ರಘುಮೂರ್ತಿ ವಿದ್ಯಾರ್ಥಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಸನ್ಮಾನಿಸಿ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಲು ಶಿಕ್ಷಣವು ಒಂದೇ ಉತ್ತಮ ಮಾರ್ಗವಾಗಿದ್ದು ಶಿಕ್ಷಣದಿಂದ ಮಾತ್ರ ಜೀವನ ಬಲವರ್ಧನೆ ಸಾಧ್ಯ ಚಳ್ಳಕೆರೆ ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿದ್ದು ಎಲ್ಲ ವರ್ಗದ ವಿದ್ಯಾರ್ಥಿಗಳು ಶಿಕ್ಷಣ ಕಲಿಯಲು ಅನುಕೂಲ ಮಾಡಿಕೊಟ್ಟಿದೆ ನಿವೃತ್ತ ನೌಕರರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲಿ ಹಿರಿಯರಿಗೆ ಗೌರವ ನೀಡುವುದು ಕಡಿಮೆಯಾಗಿದೆ ಅವರನ್ನು ತಾತ್ಸಾರ ಮನೋಭಾವದಿಂದ ಕಾಣಬಾರದು ಮುಂದಿನ ದಿನಗಳಲ್ಲಿ ವೀರಶೈವ ಸಮಾಜವು ಇಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ನಗರ ಸಭೆ ಅಧ್ಯಕ್ಷೆ ಶಿಲ್ಪ ಮುರಳಿ ಮಾತನಾಡಿ ಶಿಕ್ಷಣ ಪ್ರತಿಯೊಬ್ಬರ ಹಕ್ಕಾಗಿದ್ದು ಶಿಕ್ಷಣದಿಂದ ಯಾರು ವಂಚಿತರಾಗಬಾರದು ಇಂದಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೊಬೈಲ್ ಗೀಳಿಗೆ ಒಳಗಾಗಿದ್ದು ಇಂತಹ ಚಟುವಟಿಕೆಗಳಿಂದ ಹೊರಬಂದು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ವಿದ್ಯಾಭ್ಯಾಸ ಪಡೆದರೆ ಉತ್ತಮ ಸ್ಥಾನಕ್ಕೆ ಏರಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ತಾಲ್ಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿ.ಗುರುಸಿದ್ದಮೂರ್ತಿ, ಶ್ರೀ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸಿ.ನಾಗರಾಜು,ತಾಲ್ಲೂಕು ಗ್ಯಾರಂಟೀ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ,ಹಿರಿಯ ಮುಖಂಡರಾದ ಟಿ.ಪ್ರಭುದೇವ,ನಗರಸಭಾ ಅಧ್ಯಕ್ಷರಾದ ಶಿಲ್ಪಾಮುರುಳಿದರ್,ಉಪಾಧ್ಯಕ್ಷರಾದ ಕವಿತಾ ಬೋರಯ್ಯ, ಹಾಗೂ ಲಿಂಗಾಯತ ಸಮಾಜದ ಜನರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

