ಉತ್ತಮ ಪೌಷ್ಟಿಕ ಆಹಾರ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಗರ್ಭಿಣಿ ಹಾಗೂ ಬಾಣಂತಿಯರು ಆರೋಗ್ಯದ ಕಾಳಜಿ ವಹಿಸಿ: ನ್ಯಾ. ಸಮೀರ್ ಪಿ ನಂದ್ಯಾಲ್ ಕರೆ
ಚಳ್ಳಕೆರೆ: ಇಂದಿನ ಸಮಾಜಕ್ಕೆ ಯಾವ ರೀತಿ ಆಹಾರ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂಬ ತಿಳುವಳಿಕೆಯನ್ನು ಸರ್ಕಾರ ಹೇಳಿಕೊಡುವ ಪರಿಸ್ಥಿತಿಗೆ ಸಮಾಜವು ತಂದುಕೊಂಡಿದೆ ಎಂದು ಚಳ್ಳಕೆರೆ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಸಮೀರ್ ಪಿ ನಂದ್ಯಾಲ್ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಗರ್ಭಿಣಿ ಹಾಗೂ ಬಾಣಂತಿಯರು ಉತ್ತಮ ಪೌಷ್ಟಿಕ ಆಹಾರ ಸೇವನೆ ಮಾಡುವ ಮೂಲಕ ಸಮಾಜಕ್ಕೆ ಆರೋಗ್ಯವಂತ ಮಕ್ಕಳನ್ನು ನೀಡುವ ಗುರುತರ ಜವಾಬ್ದಾರಿ ಇರುತ್ತದೆ ಸದೃಢ ದೇಶ ಕಟ್ಟಲು ಉತ್ತಮ ಆಹಾರ ಸೇವನೆ ಅಗತ್ಯವಾಗಿದ್ದು ವಿದ್ಯಾರ್ಥಿಗಳಿಗೂ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಬೇಕಿದೆ ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ಹೆಚ್ ಆರ್ ಹೇಮಾ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಉದ್ಯೋಗಸ್ಥ ಮಹಿಳೆಯರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡದೆ ಇರುವುದರಿಂದ ತಮಗೆ ಜನಿಸುವ ಮಕ್ಕಳಿಗೆ ಅಪೌಷ್ಟಿಕತೆ ಕಾಡುತ್ತಿದ್ದು ಇದು ಮಗುವಿನ ಬೆಳವಣಿಗೆಯಲ್ಲಿ ಪರಿಣಾಮ ಬೀರುತ್ತದೆ.ಮಹಿಳೆಯರು ತಮ್ಮ ಜೊತೆಗೆ ಮಕ್ಕಳನ್ನು ಆರೋಗ್ಯವಂತರನ್ನಾಗಿಸುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಮಹಿಳೆಯರು ಪೋಷಣ್ ಅಭಿಯಾನದಡಿ ದೊರೆಯುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸದುಪಯೋಗಪಡಿಸಿಕೊಳ್ಳಬೇಕು ಈ ಮೂಲಕ ತಮ್ಮ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಎಸ್ ರಾಜನಾಯಕ್ ಮಾತನಾಡಿ ಅಪೌಷ್ಟಿಕತೆ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ರಾಷ್ಟ್ರೀಯ ಪೋಷಣ್ ಅಭಿಯಾನ ಒಂದು ಮಹತ್ತರ ಕಾರ್ಯಕ್ರಮವಾಗಿದ್ದು ಕಿಶೋರಿ ಬಾಲಕಿಯರಿಂದ ಹಿಡಿದು ಗರ್ಭಿಣಿಯರು ಸೇರಿದಂತೆ ಮಹಿಳೆಯರು ಮತ್ತು ಮಕ್ಕಳನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸುವ ಕಾರ್ಯಕ್ರಮವಾಗಿದೆ ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರದ ಬಗ್ಗೆ ಉತ್ತಮ ಮಾಹಿತಿ ನೀಡಿ ಜಾಗೃತಿ ಕಲಿಸುತ್ತಿದ್ದಾರೆ ಸದೃಢವಾದ ಮತ್ತು ಆರೋಗ್ಯವಂತ ಸಮಾಜ ಕಟ್ಟಬೇಕಾದರೆ ಗರ್ಭಿಣಿಯರು ಬಾಣಂತಿಯರು ಪೌಷ್ಟಿಕ ಆಹಾರ ಬಳಸುವ ಮೂಲಕ ತಮ್ಮ ಮತ್ತು ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಶಶಿಧರ್ ಮಾತನಾಡಿ ದೇಶದಲ್ಲಿ ಅಪೌಷ್ಟಿಕತೆಯ ಮಕ್ಕಳ ಜನನ ಪ್ರಮಾಣವನ್ನು ತಗ್ಗಿಸಲು ರಾಷ್ಟ್ರೀಯ ಪೋಷಣ ಅಭಿಯಾನವನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು ಸುಮಾರು ಒಂದು ತಿಂಗಳುಗಳ ಕಾಲ ಎಲ್ಲ ಗ್ರಾಮೀಣ ಭಾಗಗಳಲ್ಲಿ ಕಾರ್ಯಕ್ರಮ ಜರುಗಲಿದೆ ರಾಷ್ಟ್ರೀಯ ಪೋಷಣ ಅಭಿಯಾನದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಸರ್ಕಾರದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಸೀಮಂತ ಕಾರ್ಯ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಸಿವಿಲ್ ನ್ಯಾಯಾಧೀಶ ಬಿ ಆರ್ ಪುನೀತ್ ವಕೀಲರ ಸಂಘದ ಅಧ್ಯಕ್ಷ ಕೆ ಎಂ ನಾಗರಾಜ್ ಉಪಾಧ್ಯಕ್ಷ ಬಿ ಪಾಲಯ್ಯ ಕಾರ್ಯದರ್ಶಿ ಸಿದ್ದರಾಜು ರುದ್ರಯ್ಯ ಡಾ. ಅರುಣ್ ಕುಮಾರ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ವಕೀಲರು ಉಸ್ಥಿತರಿದ್ದರು.

